ಚಿತ್ರದುರ್ಗ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಂಕಣತೊಟ್ಟು ಕ್ಷೇತ್ರದ ಹಲವು ಕಡೆ ಅಭಿವೃದ್ಧಿ ಕಾರ್ಯಗಳಿಗೆ ಭೂವಿ ಪೂಜೆಯನ್ನು ನೆರವೇರಿಸಲಾಗುತ್ತದೆ, ಅಭಿವೃದ್ಧಿ ಕಾಮಗಾರಿಗಳು ಜನರ ಸಹಕಾರ, ಅಧಿಕಾರಿಗಳ ಜವಾಬ್ದಾರಿ ಹಾಗೂ ಗುತ್ತಿಗೆದಾರರ ಗುಣಮಟ್ಟದ ಕೆಲಸದಿಂದ ಮಾತ್ರ ಯಶಸ್ವಿಯಾಗುತ್ತವೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಹೇಳಿದರು.
ಕ್ಷೇತ್ರದ ಮದಕರಿಪುರ ಮತ್ತು ನಗರದ ಅಮೃತ ಆಯುರ್ವೇದಿಕ್ ಕಾಲೇಜು ಬಳಿ ಶನಿವಾರ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಇತರ ಮೂಲಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳ ಮೂಲಕ ಅನುದಾನ ಬಿಡುಗಡೆ ಮಾಡುತ್ತಿದೆ. ಜನರಿಗೆ ಶಾಶ್ವತ ಹಾಗೂ ಗುಣಮಟ್ಟದ ಸೌಲಭ್ಯ ಕಲ್ಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
೨೦೨೫–೨೬ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ತಿರುವಿನಿಂದ ಅಮೃತ ಆಯುರ್ವೇದ ಕಾಲೇಜುವರೆಗೆ ಸುಮಾರು ೭೦ ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಹಲವು ವರ್ಷಗಳಿಂದ ಗುಂಡಿಗಳು, ಧೂಳು ಹಾಗೂ ಮಳೆಗಾಲದ ಕೆಸರಿನಿಂದ ಬಳಲುತ್ತಿದ್ದ ಈ ರಸ್ತೆಗೆ ಈಗ ಶಾಶ್ವತ ಪರಿಹಾರ ಸಿಗಲಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸುರಕ್ಷಿತ ಸಂಚಾರ ಸಾಧ್ಯವಾಗಲಿದೆ ಎಂದರು.

ನಗರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆ ನಿರ್ಮಾಣದಿಂದ ಅಪಘಾತಗಳ ಸಾಧ್ಯತೆ ಕಡಿಮೆಯಾಗುವುದರ ಜೊತೆಗೆ ವಾಹನಗಳ ನಿರ್ವಹಣಾ ವೆಚ್ಚವೂ ತಗ್ಗಲಿದೆ ಎಂದು ಹೇಳಿದರು.
ಇದೇ ವೇಳೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ–ಶ್ರೀ ಮಹಾಲಕ್ಷ್ಮೀ ಮಹಾದ್ವಾರದಿಂದ ರಾಜಶೇಖರ ಅವರ ಮನೆವರೆಗೆ (ವಯಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ) ಸುಮಾರು ೭೦ ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಯಿತು. ಈ ಕಾಮಗಾರಿ ೨೦೨೪–೨೫ನೇ ಸಾಲಿನ ಮಳೆ ಪರಿಹಾರ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ.
ಮದಕರಿಪುರ ಗ್ರಾಮದಲ್ಲಿ ಮಳೆಗಾಲದಲ್ಲಿ ರಸ್ತೆ ಮೇಲೆ ನೀರು ನಿಂತು ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಹಿರಿಯ ನಾಗರಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಬೇಗ ಹಾಳಾಗುತ್ತಿತ್ತು. ಈಗ ರಸ್ತೆ ಮತ್ತು ಚರಂಡಿಯನ್ನು ಒಟ್ಟಿಗೆ ನಿರ್ಮಿಸುವುದರಿಂದ ಮಳೆನೀರು ಸರಾಗವಾಗಿ ಹರಿದು ರಸ್ತೆ ದೀರ್ಘಕಾಲ ಬಾಳಿಕೆ ಬರುವಂತೆ ಮಾಡಲಾಗುತ್ತಿದೆ ಎಂದು ಶಾಸಕ ವಿವರಿಸಿದರು.
ಅಭಿವೃದ್ಧಿ ಕಾಮಗಾರಿಗಳ ಯಶಸ್ಸಿಗೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ. ಜನರು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಜಾಗೃತಿಯಿಂದ ಗಮನಹರಿಸಿ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕ್ ಪಂಚಾಯಿತಿ ಇಓ ರವಿಕುಮಾರ್, ಕೆಡಿಪಿ ಸಭೆಯ ಸದಸ್ಯರಾದ ಸಂತೋಷ್, ನಾಗರಾಜ್, ಅಮೃತ ಆಯುರ್ವೇದ ಕಾಲೇಜ್ ಕಾರ್ಯದರ್ಶಿ ಭರತ್, ನಿರುತ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಾದ ರೇವಣಸಿದ್ದಪ್ಪ, ರಮೇಶ್, ಕಾಂಗ್ರೆಸ್ ಯುವ ಮುಖಂಡರಾದ ರಾಜೇಶ್ ಮದುರೆ, ಸಮರ್ಥ್, ವಿಕಾಸ್, ಪೃಥ್ವಿ, ಸಂಜಯ್, ಮಲ್ಲಿಕಾರ್ಜುನ್, ವೆಂಕಟೇಶ್, ಸಾಗರ್, ವೀರಣ್ಣ, ರಾಜಣ್ಣ, ನಿಂಗಪ್ಪ, ಮಂಜಣ್ಣ, ಬಸವರಾಜ್, ಮುರುಳಿ, ಬಸವರಾಜ್, ನಾಗರಾಜ್, ನವೀನ್ ಕುಮಾರ್, ತಿಪ್ಪೇಶ್, ದ್ಯಾಮಣ್ಣ, ವೆಂಕಟೇಶ್, ವಿಶ್ವನಾಥ್ ರೆಡ್ಡಿ, ಭೀಮರಾಜ್, ಅಣ್ಣಪ್ಪ, ನಂದನ್, ಕೃಷ್ಣಮೂರ್ತಿ, ಓಬಳೇಶ್, ದಿನೇಶ್, ಶಿಲ್ಪ, ಭವ್ಯ, ಶ್ರೀನಿವಾಸ್, ಯಶವಂತ್, ನಾಗರಾಜ್, ಹೊನ್ನೇಶ್ ಹಾಗೂ ಇತರರು ಇದ್ದರು
ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಅಧಿಕಾರಿಗಳು ನಿರಂತರವಾಗಿ ಸ್ಥಳ ಪರಿಶೀಲನೆ ನಡೆಸಬೇಕು. ಗುತ್ತಿಗೆದಾರರು ಸರ್ಕಾರದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾಮಗಾರಿ ಪೂರ್ಣಗೊಳಿಸಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವೆ ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯವಿಲ್ಲದೆ ಸಮಾನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕ್ಷೇತ್ರದ ಪ್ರತಿಯೊಂದು ಗ್ರಾಮ ಹಾಗೂ ನಗರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ಶಾಸಕ ಕೆ.ಸಿ ವೀರೇಂದ್ರ ಪಪ್ಪಿ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ