ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಜಿ.ವೆಂಕಟರಮಣ ಅವರ ಸಹಭಾಗಿತ್ವದಲ್ಲಿ ಅನೇಕ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದ ಈ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾದಿಗಳನ್ನು ಹೊಂದಿದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರವು ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳೆಲ್ಲೆಲ್ಲಾ ಗುಂಡಿಗಳನ್ನು ತೋಡಿದೆ. ಆದರೆ, ಈ ಅನಾಮಿಕನ ಹಿಂದಿರುವ ದುಷ್ಟ ವ್ಯಕ್ತಿಗಳು ಯಾರು? ಮತ್ತು ಅವರು ಮಾಡುತ್ತಿರುವ ಸಂಚುಗಳೇನು? ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿಲ್ಲ. ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಬಿಜೆಪಿ ರಾಜ್ಯಾದ್ಯಂತ ಈ ಪ್ರತಿಭಟನೆಯನ್ನು ಕೈಗೊಂಡಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್ಕೃತ್ವವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀನಿವಾಸ್ ಮೋತ್ಕರ್, ಕಲ್ಪನಾ ವೆಂಕಟರಾಮಿರೆಡ್ಡಿ, ಧುರೀಣರಾದ ಎಸ್.ಮಲ್ಲನಗೌಡ, ಐನಾಥ್ ರೆಡ್ಡಿ, ವಿಜಯಲಕ್ಷಿö್ಮ, ಸಾಧನಾ ಹಿರೇಮಠ, ಜ್ಯೋತಿ, ಮಹಿಪಾಲ್, ರಾಮಾಂಜಿನಿ, ಹನುಮಂತ್, ವೆಂಕಟ್ರಮಣ ರೆಡ್ಡಿ, ಶರಣ್, ಸುಧಾಕರ್, ಅಡವಿ ಸ್ವಾಮಿ, ಡಾ.ಅರುಣಾ, ಸುಗುಣ, ಕೌಶಲ್ಯ, ಪುಷ್ಪಲತಾ, ರೂಪ ಶ್ರೀ, ಅಲಿವೇಲಮ್ಮ ಸೇರಿದಂತೆ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಪ್ರತಿ ಭಟನೆಯಲ್ಲಿ ಭಾಗವಹಿಸಿದ್ದರು.