ಕಳೆದ 2022ರ ಫೆಬ್ರವರಿ 24ರಂದು ಆರಂಭವಾದ ಈ ಕಾಮಗಾರಿ, ಹಲವು ವರ್ಷಗಳಾದರೂ ಇನ್ನೂ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿದ್ದು, ತೆರೆದ ಚರಂಡಿ ಕೆಲಸವೂ ಅಪೂರ್ಣವಾಗಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಮಣ್ಣು ಹಾಗೂ ಕಲ್ಲು ಬಿಂಚುಗಳನ್ನು ಹಾಕಿದ್ದು, ಕಾಮಗಾರಿಯನ್ನು ನಿಧಾನಗತಿಯಲ್ಲೇ ನಡೆಸಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪಾದಚಾರಿಗಳು ದಿನನಿತ್ಯ ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ಈ ರಸ್ತೆ ಕಾಮಗಾರಿ ಗುತ್ತಿಗೆದಾರ ಕೆ.ಎಂ. ಪ್ರವೀಣ್ ಕುಮಾರ್ ಅವರ ಮೂಲಕ, ಪಿಡಬ್ಲ್ಯೂಡಿ ಎಡಬ್ಲ್ಯೂ ಬಸವ ರೆಡ್ಡಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ಕಾಮಗಾರಿಯ ಗುಣಮಟ್ಟ ತೀರಾ ಕಳಪೆಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಈ ಕುರಿತು ಸ್ಥಳೀಯರು ಬಾಪೂಜಿ ನಗರ ಏಳನೇ ವಾರ್ಡಿನ ಕಾರ್ಪೊರೇಟರ್ ಉಮಾದೇವಿ ಶಿವರಾಜ್ ಅವರ ಗಮನಕ್ಕೆ ತಂದರೂ, ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗಲಿಲ್ಲವೆಂಬ ಅಸಮಾಧಾನ ವ್ಯಕ್ತವಾಗಿದೆ.

ಇದೇ ಪ್ರದೇಶದ ಮಾಜಿ ಕಾರ್ಪೊರೇಟರ್ ಶ್ರೀಮತಿ ನಾರಾಯಣಮ್ಮನ ಅವರ ಮಗ, ಕಾಂಗ್ರೆಸ್ ಮುಖಂಡರಾದ ಬಾಪೂಜಿ ನಗರ್ ವೆಂಕಟೇಶ್ ಅವರು ಈ ಕುರಿತು ಪಿಡಬ್ಲ್ಯೂಡಿ ಇಲಾಖೆಗೆ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ಬೇಸತ್ತಿರುವ ಅವರು, ಸಾರ್ವಜನಿಕರ ಪರವಾಗಿ ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಳಪೆ ಕಾಮಗಾರಿಯಿಂದ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಒತ್ತಾಯ ಸ್ಥಳೀಯರಿಂದ ಕೇಳಿ ಬಂದಿದೆ.