ಬೆಂಗಳೂರು : ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹಿರೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ವಿಸ್ತೀರ್ಣ ಕೇಂದ್ರ ಆಸ್ಪತ್ರೆಯನ್ನು ಮುಚ್ಚಲು ಮುಂದಾಗಿರುವ ನಿರ್ಧಾರವನ್ನು ಕೈಬಿಡುವಂತೆ ಮನವಿ ಸಲ್ಲಿಸಿದರು.
ಹಿರೇಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಜನತೆಗೆ ಈ ಆಸ್ಪತ್ರೆ ಪ್ರಮುಖ ಆರೋಗ್ಯ ಸೇವಾ ಕೇಂದ್ರವಾಗಿದ್ದು, ಅದನ್ನು ಮುಚ್ಚುವುದರಿಂದ ಗ್ರಾಮಸ್ಥರಿಗೆ ಗಂಭೀರ ವೈದ್ಯಕೀಯ ಸಮಸ್ಯೆಗಳು ಎದುರಾಗಲಿವೆ. ಸಮೀಪದ ಮತ್ತೊಂದು ಆಸ್ಪತ್ರೆಗೆ ತೆರಳಲು ಸುಮಾರು 25 ಕಿಲೋಮೀಟರ್ ದೂರ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಜನಸಂಖ್ಯೆ ಮತ್ತು ಸಾರ್ವಜನಿಕ ಅಗತ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಸ್ಪತ್ರೆಯನ್ನು ಮುಂದುವರಿಸಬೇಕೆಂದು ಅವರು ಮನವಿ ಮಾಡಿದರು.
ಈ ಕುರಿತು ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಡಾ. ಯೋಗೇಶ್ ಬಾಬು ಅವರು, ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆ ಲಭ್ಯವಾಗುವಂತೆ ಸರ್ಕಾರವು ಸಂವೇದನಾಶೀಲ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದಲ್ಲದೆ, ದೊಡ್ಡ ಉಳ್ಳಾರ್ತಿ ಹಾಗೂ ಬಿಜಿ ಕೆರೆ ಸಮುದಾಯ ಆರೋಗ್ಯ ಕೇಂದ್ರಗಳು ಉದ್ಘಾಟನೆಗೆ ಸಿದ್ಧವಾಗಿರುವ ಹಿನ್ನೆಲೆಯಲ್ಲಿ, ಅವುಗಳನ್ನು ಆದಷ್ಟು ಶೀಘ್ರದಲ್ಲಿ ಸಾರ್ವಜನಿಕ ಸೇವೆಗೆ ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರನ್ನು ಅವರು ಕೋರಿದರು.