LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರ ಭೂಮಿ ಕಬಳಿಕೆ : ಸಮಗ್ರ ತನಿಖೆಗೆ ಆಗ್ರಹ

ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ 

ಚಿತ್ರದುರ್ಗ: ಸರ್ಕಾರಿ ಜಾಗ, ದಲಿತ ಭೂಮಿ ಕಬಳಕಿ ಮಾಡುತ್ತಿರುವ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಗಳಿಸಿರುವ ಅಕ್ರಮ ಆಸ್ತಿ ಕುರಿತು ಸಮಗ್ರ ತನಿಖೆ ನಡೆಸುವಂತೆ ಮಾಜಿ ಸಚಿವ ಹೆಚ್.ಆಂಜನೇಯ ಆಗ್ರಹಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಳಲ್ಕೆರೆಯಲ್ಲಿ ಈ ಹಿಂದೆ ಸತ್ತವರ ಆಸ್ತಿ ಕಬಳಿಸಲು ನಡೆಸಿದ್ದ ಪ್ರಯತ್ನವನ್ನು ಬಹಿರಂಗಗೊಳಿಸುತ್ತಿದ್ದಂತೆ ಕದ್ದುಮುಚ್ಚಿ ಹೋಗಿ ಅವರಿಗೆ ಆಸ್ತಿಯನ್ನು ಮರು ನೋಂದಣಿ ಮಾಡಿಸಿಕೊಟ್ಟಿದ್ದ ಚಂದ್ರಪ್ಪ, ಈಗ ದಲಿತರ ಭೂಮಿ ಮೇಲೆ ಕೆಂಗಣ್ಣು ಹಾಕಿದ್ದಾರೆ ಎಂದು ದೂರಿದರು.

ಕ್ಷೇತ್ರದಲ್ಲಿ ದಲಿತರ ಭೂಮಿಯನ್ನು ಬೇರೊಬ್ಬರ ಹೆಸರಿಗೆ ಮಾಡಿಸಿ, ಅದನ್ನು ತನ್ನ ಕುಟುಂಬದ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳುವ ಷಡ್ಯಂತರ ನಿರಂತವಾಗಿ ನಡೆಯುತ್ತಿದೆ. ಈ ಕಾರ್ಯಕ್ಕೆ ಜಿಲ್ಲಾ, ತಾಲ್ಲೂಕು ಆಡಳಿತ ಬೆಂಬಲವಾಗಿ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಸಿ ಮೀಸಲಾತಿ ಸೌಲಭ್ಯದಡಿ ಜನಪ್ರತಿನಿಧಿ ಆಗಿರುವ, ಅನೇಕ ಸೌಲಭ್ಯ ಪಡೆದಿರುವ ಚಂದ್ರಪ್ಪ, ದಲಿತರ ಭೂಮಿ ಖರೀದಿಸಬಾರೆಂಬ ಸಾಮಾನ್ಯ ಪ್ರಜ್ಞೆ ಇಲ್ಲ. ಈ ಕಾರಣಕ್ಕೆ ಜಿಲ್ಲೆಯಲ್ಲಿ ಅನೇಕ ಬಡ, ದಲಿತರ ಭೂಮಿಯನ್ನು ತನ್ನ ಕುಟುಂಬದ ಹೆಸರಿಗೆ ನೋಂದಣಿ ಮಾಡಿಸಿಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆದುಕೊಂಡು ಬಂದಿದೆ ಎಂದು ದೂರಿದರು.

ಹೊಳಲ್ಕೆರೆ ಕ್ಷೇತ್ರದಲ್ಲಿ ಭೋವಿ, ಮಾದಿಗ ಸೇರಿ ಅನೇಕ ದಲಿತ ಕುಟುಂಬದ ಆಸ್ತಿ ಮೇಲೆ ಕಣ್ಣು ಹಾಕಿ, ಕಾನೂನು ಕುಣಿಕೆಗೆ ಸಿಲುಕದ ರೀತಿ ತನ್ನ ಕುಟುಂಬದ ಹೆಸರಿಗೆ ಮಾಡಿಸಿಕೊಳ್ಳುತ್ತಿರುವ ಚಂದ್ರಪ್ಪ, ಉಳುವವನೆ ಭೂ ಒಡೆಯ ಕಾಯ್ದೆ ವಿರುದ್ಧವಾಗಿದ್ದಾರೆ ಎಂದರು.

12 ಎಕರೆ ದಲಿತರ ಭೂಮಿಯನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡಿರುವ ಚಂದ್ರಪ್ಪ ಕುಟುಂಬ, ಈಗ ಈ ಜಮೀನು ಪಕ್ಕದಲ್ಲಿರುವ 218 ಎಕರೆ ವಿಸ್ತೀರ್ಣದ ಬಹುದೊಡ್ಡ ಸರ್ಕಾರಿ ಗುಡ್ಡವನ್ನೇ ಕಬಳಿಸಲು ಮುಂದಾಗಿದೆ. ಈ ಗುಡ್ಡ ಖನಿಜ ಸಂಪತ್ತನ್ನು ತನ್ನ ಒಡಲಲ್ಲಿಟ್ಟುಕೊಂಡಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಅಕ್ರಮವಾಗಿ ಮನೆ ಕಟ್ಟಲಾಗಿದೆ. ಜೊತೆಗೆ ಗುಡ್ಡವನ್ನೇ ಕರಗಿಸಲಾಗುತ್ತಿದೆ ಎಂದು ದೂರಿದರು.

ಉಳುವವನೆ ಭೂ ಒಡೆಯ, ದರಖಾಸ್ತ್ ಅಡಿ ಭೂಮಿ ಪಡೆದವರು ಯಾವುದೇ ಕಾರಣಕ್ಕೂ ಮಾರಾಟ ಮಾಡಲು ಹಕ್ಕುದಾರರಲ್ಲ. ಆದರೆ, ಚಂದ್ರಪ್ಪ, ಅಂತಹವರ ಜಮೀನನ್ನು ಮೊದಲಿಗೆ ಅನ್ಯ ಸಮುದಾಯದವರಿಗೆ ವರ್ಗಾಯಿಸಿ, ಬಳಿಕ ತನ್ನ ಕುಟುಂಬದ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ದಲಿತರಿಂದ ಭೂಮಿ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಂದ್ರಪ್ಪ ಅವರ ಈ ಅಕ್ರಮ ಕಾರ್ಯ ಗೊತ್ತಿದ್ದೂ ಏನೂ ಮಾತನಾಡದ ಸ್ಥಿತಿಗೆ ಜಿಲ್ಲಾ, ತಾಲ್ಲೂಕು ಆಡಳಿತದ ಅಧಿಕಾರಿಗಳು ತಲುಪಿದ್ದಾರೆ. ಒಂದು ವೇಳೆ ಪ್ರಶ್ನೀಸಿದರೆ ಅಧಿಕಾರಿಗಳ ವಿರುದ್ಧ ಕೆಡಿಪಿ ಸಭೆಯಲ್ಲಿ ತರಾಟೆಗೆ ತೆಗೆದುಕೊಳ್ಳುವ ಮೂಲಕ ಅವರನ್ನು ಕಟ್ಟಿಹಾಕುವ ಕಾರ್ಯ ನಡೆಯುತ್ತಿದೆ. ಆದ್ದರಿಂದ ಶಾಸಕರ ಅಕ್ರಮ ವಿರುದ್ಧ ಯಾವುದೇ ಅಧಿಕಾರಿ ಬಾಯಿ ಬಿಡುತ್ತಿಲ್ಲ ಎಂದು ದೂರಿದರು.

ಎಸ್ಸಿ, ಎಸ್ಟಿ ಸಮುದಾಯದವರು ಭೂಮಿ ಹೊಂದುವ ಹಕ್ಕು ಕಸಿದುಕೊಳ್ಳಬಾರದೆಂಬ ತಿಳಿವಳಿಕೆಯೇ ಇಲ್ಲ. ಅದರಲ್ಲೂ ತನ್ನ ದುಷ್ಕøತ್ಯಕ್ಕೆ ಮೇಲ್ವರ್ಗದ ಜನರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದ ಅತ್ಯಂತ ಹೇಯ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಶಾಸಕ ಚಂದ್ರಪ್ಪ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಡ, ದಲಿತರ ಭೂ ಹಕ್ಕು ಕಸಿದುಕೊಳ್ಳುತ್ತಿದ್ದಾರೆ. ಈ ಸಂಬಂಧ ಈಗಾಗಲೇ ದಾಖಲೆ ಸಮೇತ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ತಿಳಿಸಿದರು.

ಶಾಸಕ ಚಂದ್ರಪ್ಪ ಅಕ್ರಮವಾಗಿ ಸಂಪಾದಿಸಿರುವ ನಿವೇಶನ, ಜಮೀನನ್ನು ಎಸ್ಸಿ, ಎಸ್ಟಿ ಸಮುದಾಯಕ್ಕೆ ವಾಪಸ್ಸು ಕೊಡಿಸಲು ಆಡಳಿತ ವರ್ಗ ಮುಂದಾಗಬೇಕು. ಮೂಲ ವಾರಸುದಾರರಿಗೆ ಭೂಮಿ ಹಿಂತಿರುಗಿಸಬೇಕು. ಇಲ್ಲದಿದ್ದರೇ ಅಧಿಕಾರಿ ವರ್ಗದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರ ನಮ್ಮದೇ ಇದೆ. ಹಾಗೇಂದು ನಾವು ಅಧಿಕಾರಿಗಳು ಮಾಡುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತದೆ ಇರಲು ಸಾಧ್ಯವೇ ಇಲ್ಲ. ಎಷ್ಟೇ ಬಲಶಾಲಿಯಾಗಿದ್ದರೂ ನ್ಯಾಯದ ಹಾದಿಯಲ್ಲಿ ಅಧಿಕಾರಿಗಳು ಸಾಗಬೇಕು. ಬಡಜನರಿಗೆ ಅನುಕೂಲ ಮಾಡಿಕೊಡಲು ಶ್ರಮಿಸಬೇಕು. ಆದರೆ, ಅಧಿಕಾರಿಗಳು ಶಾಸಕನ ಒತ್ತಡಕ್ಕೆ ಮಣಿದು ತಪ್ಪು ದಾರಿಯಲ್ಲಿ ಸಾಗುತ್ತಿದ್ದಾರೆ. ಆದ್ದರಿಂದ ಬಹಿರಂಗವಾಗಿ ನಮ್ಮ ಸರ್ಕಾರದ ಆಡಳಿತದ ವಿರುದ್ಧವೇ ಮಾತನಾಡುವ ಪರಿಸ್ಥಿತಿ ಎದುರಾಗಿದೆ ಎಂದರು.

ಶಾಸಕ ಚಂದ್ರಪ್ಪ ಮಾಡಿರುವ ದುಷ್ಕøತ್ಯ ಬಡಜನರು ಮಾಡಿದ್ದರೇ ಇಷ್ಟೋತ್ತಿಗೆ ಜೈಲು ಸೇರುತ್ತಿದ್ದರು. ಬಡವನಿಗೆ-ಶ್ರೀಮಂತನಿಗೆ ಪ್ರತ್ಯೇಕ ಕಾನೂನು ಇಲ್ಲ. ಈ ಸತ್ಯವನ್ನು ಅಧಿಕಾರಿಗಳು ಅರಿತು ಆಡಳಿತ ನಡೆಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಈ ಸಂಬಂಧ ಅನೇಕ ದೂರುಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಲಾಗಿದೆ. ಆದರೂ ನುಣಚಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಈ ಮೂಲಕ ಬಡವರು, ದಲಿತರ ಭೂಮಿ ಹಕ್ಕು ನೀತಿ ಕಸಿದುಕೊಳ್ಳಲಾಗುತ್ತಿದೆ. ಶಾಸಕ ಚಂದ್ರಪ್ಪ ಕುಟುಂಬ ಗಳಿಸಿರುವ ಅಕ್ರಮ ಆಸ್ತಿ, ಬಡ, ದಲಿತರ ಭೂಮಿ ಕಬಳಿಕೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳೇ ಮಧ್ಯವರ್ತಿಗಳು

ಹೊಳಲ್ಕೆರೆಯಲ್ಲಿ ದಲಿತರು, ಬಡವರ ಭೂಮಿ ಕಬಳಿಕೆ ವಿಷಯದಲ್ಲಿ ಅಧಿಕಾರಿಗಳೇ ಮಧ್ಯವರ್ತಿಗಳಾಗಿದ್ದಾರೆಂಬ ಸಂಶಯ ಕಾಡುತ್ತಿದೆ ಎಂದು ಮಾಜಿ ಸಚಿವ ಆಂಜನೇಯ ದೂರಿದರು. ಈಗಾಗಲೇ ಅನೇಕರ ಆಸ್ತಿ ಕಬಳಿಸಿರುವ ಚಂದ್ರಪ್ಪ, ಈಗ ಸರ್ಕಾರಿ ಭೂಮಿಯ ಒಡಲು ಬಗೆದು ಖನಿಜ ಸಂಪತ್ತು ಕಳ್ಳತನ ಮಾಡುವ ಕೃತ್ಯಕ್ಕೆ ಮುಂದಾಗಿದ್ದಾರೆ. ಇದೆಲ್ಲವೂ ಗೊತ್ತಿದ್ದು ಅಧಿಕಾರಿಗಳು ಮೌನವಾಗಿರುವುದು ಅವರೇ ಅಕ್ರಮದಲ್ಲಿ ಮಧ್ಯವರ್ತಿಗಳಾಗಿದ್ದಾರೆಂಬ ಭಾವನೆ ಎಂದು ಆರೋಪಿಸಿದರು.

ಸಾಯಿಸಲು ಬಂದಿದ್ರು

ಶಾಸಕ ಚಂದ್ರಪ್ಪ ದಲಿತರ ಭೂಮಿ ಗಬಳಿಸಿ, ಪಕ್ಕದಲ್ಲಿ ಗುಡ್ಡದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದನ್ನು ಖಂಡಿಸಿ ನಾನು ಸ್ಥಳಕ್ಕೆ ಭೇಟಿ ನೀಡಿದ್ದೇವೆ. ವೇಳೆ ನನ್ನ ಮೇಲೆಯೇ ಲಾರಿ ಹತ್ತಿಸಿ, ಕೊಲ್ಲುವ ಪ್ರಯತ್ನ ನಡೆದಿತ್ತು ಎಂದು ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್ ದೂರಿದರು. ಆದರೂ ನಾನು ಎದೆಗುಂದದೆ ಎಲ್ಲ ದಾಖಲೆ ಸಂಗ್ರಹಿಸಿದ್ದೇನೆ. ಸಂಬಂಧ ಸಂಬಂಧಿಸಿದ ಸಚಿವರು, ಅಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಿದ್ದೇನೆ. ನನ್ನ ದೂರು ಆಧರಿಸಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಕ್ರಮ ನಡೆದಿರುವುದನ್ನು ಖಚಿತ ಪಡೆಸಿ ವರದಿ ಸಲ್ಲಿಸಿದ್ದಾರೆ. ಕಾನೂನು ಕ್ರಮ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST