LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಂದು ಮತಕ್ಕೂ ಹೆಚ್ಚಿನ ಪ್ರಾಶಸ್ತ್ಯವಿದೆ

ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಡಿಸಿ ನಾಗೇಂದ್ರ ಪ್ರಸಾದ್.ಕೆ ಹೇಳಿಕೆ

ಬಳ್ಳಾರಿ : ಚುನಾವಣೆ ಒಂದು ಸೂಕ್ಷ್ಮ ಪ್ರಕ್ರಿಯೆ. ಇಲ್ಲಿ ಮತದಾನ ಅತ್ಯಮೂಲ್ಯವಾಗಿದ್ದು, ಅದರಲ್ಲಿ ಒಂದೊಂದು ಮತಕ್ಕೂ ಹೆಚ್ಚಿನ ಪ್ರಾಶಸ್ತ್ಯವಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.

 

ಭಾರತದ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ ಹಾಗೂ ಜಿಲ್ಲಾ ಸ್ವೀಪ್  ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ‘ನನ್ನ ಭಾರತ, ನನ್ನ ಮತ’ ಎನ್ನುವ ಘೋಷವಾಕ್ಯದಡಿ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.



ಪ್ರತಿ ವರ್ಷ ಜ.01 ರಂದು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ತಿದ್ದುಪಡಿ, ಹೆಸರು ತೆಗೆದುಹಾಕುವಿಕೆ ಕುರಿತ ವಿವಿಧ ಅರ್ಜಿ ನಮೂನೆ ಒಳಗೊಂಡು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದ್ದು, 18 ವರ್ಷ ತುಂಬಿದ ಯುವಕ-ಯುವತಿಯರು ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಹಾಗೂ ಈ ಪ್ರಕ್ರಿಯೆ ಕುರಿತು ತಮ್ಮ ಮನೆ ಹಾಗೂ ಸುತ್ತಮುತ್ತಲಿನವರಿಗೂ ಮಾಹಿತಿ ನೀಡಬೇಕು. ಶೇಕಡವಾರು ಮತದಾನದ ಪ್ರಮಾಣ ಹೆಚ್ಚಿಸಲು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

 

ಗ್ರಾಮೀಣ ಜನರಿಗಿಂತ ನಗರ ಪ್ರದೇಶದವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮತ್ತು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದು ವಿಷಾದನೀಯ ಸಂಗತಿಯಾಗಿದೆ. ಪ್ರಸ್ತುತದಲ್ಲಿ ಚುನಾವಣೆಗಳು ಜಾತಿ, ಸಮುದಾಯಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಂಡುಬರುತ್ತಿದ್ದು, ಇದರಿಂದ ಕೆಲಸ ಮಾಡುವ ಯೋಗ್ಯರಿಗೆ ಅನ್ಯಾಯವಾಗಲಿದೆ. ಹಾಗಾಗಿ ಮತದಾರರು ವಿವೇಚನೆಯಿಂದ ಅರ್ಹರನ್ನು ಆಯ್ಕೆ ಮಾಡಬೇಕು ಎಂದರು.

 

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಉತ್ತೇಜಿಸುವ ದೃಷ್ಟಿಯಿಂದ 1950 ರಲ್ಲಿ ಸ್ಥಾಪನೆಯಾದ ಭಾರತದ ಚುನಾವಣಾ ಆಯೋಗದ ಸಂಸ್ಥಾಪನ ದಿನದ ಸವಿನೆನಪಿಗಾಗಿ 2011 ರಲ್ಲಿ ಮೊದಲ ಬಾರಿಗೆ ಜ.25 ರಂದು ರಾಷ್ಟ್ರೀಯ ಮತದಾರರದಿನವನ್ನು ಆಚರಿಸಲಾಯಿತು ಎಂದು ತಿಳಿಸಿದರು.

 

ಮತದಾನ ಎಂದರೆ ಹಬ್ಬವಿದ್ದಂತೆ. ಎಲ್ಲರೂ ತಪ್ಪದೇ ಭಾಗವಹಿಸಬೇಕು. ಅದರಲ್ಲಿ ಯುವಪೀಳೆಗೆಯ ಪಾತ್ರ ಮುಖ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಸ್ವತಂತ್ರದಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂವಿಧಾನವು ಮತದಾನ ಹಕ್ಕು ನೀಡಿದೆ. ಮತ ಚಲಾಯಿಸದಿದ್ದರೆ ಆ ಅಮೂಲ್ಯವಾದ ಹಕ್ಕನ್ನು ಕಳೆದುಕೊಂಡಂತೆ. ಹಾಗಾಗಿ ಇದರಿಂದ ಯಾರೂ ಹೊರಗುಳಿಯಬಾರದು ಎಂದು ನ್ಯಾಯಾಧೀಶರು ಹೇಳಿದರು.



ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್ ಅವರು ಮಾತನಾಡಿ, ಮತದಾನ ಹಕ್ಕು ಒಂದು ಕರ್ತವ್ಯ. ತಪ್ಪದೇ ತಮ್ಮ ಕರ್ತವ್ಯವನ್ನು ನಿರ್ಭೀತರಾಗಿ ನಿರ್ವಹಿಸಬೇಕು. ನನ್ನ ಒಂದು ಮತದಿಂದ ಏನಾಗಲಿದೆ; ಎಂದು ಉದಾಸೀನತೆ ತೋರದೇ, ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಸರ್ವರೂ ಪಾಲ್ಗೊಳ್ಳಬೇಕು. ಇದರಿಂದ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮುನ್ನಡೆಯಾಗಲಿದೆ ಎಂದು ಹೇಳಿದರು.

 

ಇದಕ್ಕೂ ಮುನ್ನ ಜಿಪಂ ಸಿಇಒ ಅವರು, ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ‘ಮತದಾರರ ಪ್ರತಿಜ್ಞಾ ವಿಧಿ’ ಭೋದಿಸಿದರು.

 

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 18 ವರ್ಷ ತುಂಬಿದ ಯುವ ಪೀಳಿಗೆಯನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸುವುದು. ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದು. ಉತ್ತಮ ನಾಯಕರನ್ನು ಆರಿಸುವುದು. ದೇಶವನ್ನು ಭದ್ರ-ಬುನಾದಿಯಾಗಿಸಲು ಅವರ ಭಾಗವಹಿಸುವಿಕೆ ಕುರಿತು ತಿಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.



ಕಾರ್ಯಕ್ರಮದಲ್ಲಿ 18 ವರ್ಷ ತುಂಬಿ ಹೊಸದಾಗಿ ನೋಂದಾಯಿಸಿಕೊಂಡ ಯುವ ಮತದಾರರಿಗೆ ಸಾಂಕೇತಿಕವಾಗಿ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.

 

ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಿ ಅಭಿನಂದಿಸಲಾಯಿತು.

 

ಬಳಿಕ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕುರಿತು ಶಾಲಾ-ಕಾಲೇಜುಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಹಾಗೂ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.



ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ, ತಾಪಂ ಇಓ ಶ್ರೀಧರ ಐ ಬಾರಿಕರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST