ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಭಾಗಿ
ಬೆಂಗಳೂರು : ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ವಿ. ಗೋಪಾಲಗೌಡ ಅವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅವರ ಅಭಿನಂದನಾ ಸಮಾರಂಭ ಇದೇ 6 ರ ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುತ್ತಿದ್ದು, ಅಭಿನಂದನಾ ಗ್ರಂಥ, ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಾಗುತ್ತಿದೆ.

ಸುದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಭಿನಂದನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಎನ್. ಪಿಳ್ಳಪ್ಪ, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಎಂ.ಎನ್. ವೆಂಕಟಾಚಲಯ್ಯ ಕಾರ್ಯಕ್ರಮ ಉದ್ಘಾಟಿಸಿ ಅಭಿನಂದನಾ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಎ.ಕೆ. ಪಟ್ನಾಯಕ್, ಕಾನೂನು ಸಚಿವ ಎಚ್.ಕೆ. ಪಾಟೀಲ್ ಮತ್ತಿತರರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.
ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಗೋಪಾಲ್ ಸುಬ್ರಮಣ್ಯಂ, ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶತ್ಥನಾರಾಯಣ, ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕ ಡಾ. ವೈ.ಎ. ನಾರಾಯಣಸ್ವಾಮಿ, ಹಿರಿಯ ನ್ಯಾಯವಾದಿ ಎಂ.ಎನ್. ಶೇಷಾದ್ರಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜಸ್ಟೀಸ್ ಎನ್. ಕೆ. ಸುಧೀಂದ್ರರಾವ್ ನೇತೃತ್ವದಲ್ಲಿ ಅಭಿನಂದನಾ ಸಮಿತಿ ರಚನೆಯಾಗಿದ್ದು, ಸಂತೇಬಾಚಹಳ್ಳಿ ಡಾ. ಎಸ್. ನಂಜುಂಡಸ್ವಾಮಿ ಅವರು ಅಭಿನಂದನಾ ಗ್ರಂಥದ ಪ್ರಧಾನ ಸಂಪಾದಕರಾಗಿದ್ಧಾರೆ. ಎಂ.ಎನ್. ಶೇಷಾದ್ರಿ ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಹಲವಾರು ಗಣ್ಯರಿಂದ ಜಸ್ಟೀಸ್ ವಿ. ಗೋಪಾಲಗೌಡರ ಕುರಿತಂತೆ ಅಮೂಲ್ಯ ಲೇಖನಗಳನ್ನು ಬರೆಸಿದ್ದಾರೆ ಎಂದು ಅಭಿನಂದನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಎನ್. ಪಿಳ್ಳಪ್ಪ ತಿಳಿಸಿದರು.