LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ

ಕೇಂದ್ರ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ

ಜೂ.26 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ

ಸರ್ಕಾರ ನುಡಿದಂತೆ ನಡೆದಿದೆ  ಎಂದ ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ:  ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ರಾಜ್ಯದಲ್ಲಿ ಆಶ್ವಾಸನೆ ನೀಡಿದಂತಹ 5 ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿ ಜನರ ಜೀವನಮಟ್ಟವನ್ನು ಸುಧಾರಿಸಿದ್ದು, ನುಡಿದಂತೆ ನಡೆದುಕೊಂಡಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬಳ್ಳಾರಿ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಟ್ಯಾಂಕ್ ಬಂಡ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರದ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.



ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಐದು ಯೋಜನೆಗಳನ್ನು ಜಾರಿಗೊಳಿಸಿದಾಗ ಅನೇಕ ಟೀಕೆ-ಪ್ರಹಾರಗಳು ನಡೆದಿದ್ದವು. ಅವೆಲ್ಲವುಗಳನ್ನು ಮೆಟ್ಟಿನಿಂತು ರಾಜ್ಯ ಸರ್ಕಾರವು ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ ಎಂದರು.

ಬಳ್ಳಾರಿ ಜಿಲ್ಲೆಯು ಅಭಿವೃದ್ಧಿಯತ್ತ ಸಾಗುತ್ತಿದೆ. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಸರ್ಕಾರವು ಮಾತು ಕೊಟ್ಟಂತೆ, ನಡೆದುಕೊಂಡಿದೆ. ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯಗಳೇ ಮುಖ್ಯವಾಗಿದ್ದು, ಜನರಿಗೆ ಉಪಯೋಗವಾಗುವಂತಹ ಯೋಜನೆಗಳನ್ನೇ ಜಾರಿಗೊಳಿಸಿದ್ದಾರೆ ಎಂದರು.

ಗ್ಯಾರAಟಿ ಯೋಜನೆಗಳು ನಾಡಿನ ಜನರ ಕಷ್ಟ-ಕಾರ್ಪಣ್ಯಗಳನ್ನು ತಗ್ಗಿಸಿ, ಘನತೆಯ ಜೀವನದ ಮೂಲಕ ಬದುಕು ಕಟ್ಟಿಕೊಳ್ಳಲು ಒದಗಿಸಿರುವ ರಕ್ಷಣೆಗಳಾಗಿವೆ. ರಾಜ್ಯ ಸರ್ಕಾರವು ಕೇವಲ ಗ್ಯಾರಂಟಿ ಯೋಜನೆಗಳಿಗೆ ಒತ್ತು ನೀಡಿಲ್ಲ, ಬದಲಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಸಹ ಮಾಡುತ್ತಿದೆ ಎಂದು ಹೇಳಿದರು.



ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶೇ.97 ರಷ್ಟು ಪ್ರಗತಿಯಾಗಿದೆ. ಅದೇರೀತಿಯಾಗಿ ಬಳ್ಳಾರಿ ಜಿಲ್ಲೆಯಲ್ಲಿ ಶೇ.97.05 ರಷ್ಟು ಫಲಾಭವಿಗಳಿಗೆ ಗ್ಯಾರಂಟಿಗಳ ಸೌಲಭ್ಯಗಳನ್ನು ತಲುಪಿಸಿದ್ದೇವೆ. ಅದೇರೀತಿಯಾಗಿ ಈವರೆಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯದೇ ವಂಚಿತರಾಗಿದ್ದಲ್ಲಿ, ನಗರದ ಜಿಲ್ಲಾ ಪಂಚಾಯತ್‌ನಲ್ಲಿರುವ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಭೇಟಿ ನೀಡಬಹುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್ ಅವರು ಮಾತನಾಡಿ, ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಎರಡು ಪೂರೈಸಿರುವ ಹಿನ್ನಲ್ಲೆಯಲ್ಲಿ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಮಾಹಿತಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿ ಜನರ ಗಮನ ಸೆಳೆಯುವಂತೆ ಮಾಡುತ್ತಿದ್ದು, ಈ ಯೋಜನೆಗಳು ಜನರ ಮನೆಯ ಬಾಗಿಲಿಗೆ ತಲುಪಿಸುವುದರ ಜೊತೆಗೆ ಸರ್ಕಾರದಿಂದ ಜಾರಿ ಮಾಡುವಂತಹ ಯೋಜನೆಗಳ ಸೌಲಭ್ಯಗಳನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.



ಈ ವೇಳೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಭಾಗವಾನ್, ವಿಭಾಗೀಯ ಸಂಚಾರಾಧಿಕಾರಿ ಚಾಮರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ವಿ.ಸಿ ಗುರುರಾಜ, ಸಿಬ್ಬಂದಿಗಳಾದ ವಿಜಯ್ ಕುಮಾರ್, ಹನುಮಂತಪ್ಪ, ಮಲ್ಲೇಶಪ್ಪ, ಹನುಮೇಶ್.ಹೆಚ್., ತೇಜ, ದಿವಾಕರ, ಶ್ರೀಧರ್ ಕಾವಲಿ, ರುದ್ರಮುನಿ ಸ್ವಾಮಿ ಸೇರಿದಂತೆ ಇತರರು ಇದ್ದರು.

ಜೂ.26 ರ ವರೆಗೆ ವೀಕ್ಷಿಸಲು ಅವಕಾಶ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವು ನಗರದ ಟ್ಯಾಂಕ್ ಬಂಡ್ ರಸ್ತೆಯ ಕೇಂದ್ರ ಬಸ್ ನಿಲ್ದಾಣದಲ್ಲಿ ಜೂ.26 ರ ವರೆಗೆ ಇರಲಿದೆ. ಈ ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದ್ದು, ಭೇಟಿ ನೀಡಿ ವೀಕ್ಷಿಸಬಹುದು.

            ವಸ್ತು ಪ್ರದರ್ಶನವು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲಾದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಮಾಹಿತಿ ಫಲಕ ಮತ್ತು ಸರ್ಕಾರದ ವಿವಿಧ ಯೋಜನೆಗಳ ಸಾಧನೆಯ ಮಾಹಿತಿ ಫಲಕಗಳು ಒಳಗೊಂಡಿದೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST