LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಕಲ್ಯಾಣ ಕರ್ನಾಟಕಕ್ಕೆ ಶ್ರಮಿಸಿದ ಹೋರಾಟಗಾರರ ತ್ಯಾಗ ಮತ್ತು ಬಲಿದಾನ ಗೌರವಿಸೋಣ: ಸಚಿವ ರಹೀಂ ಖಾನ್
ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗವು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳ್ಳಲು ಶ್ರಮಿಸಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನ ಗೌರವಿಸಲು ಕಕ ಉತ್ಸವ ದಿನಾಚರಣೆ ಆಚರಿಸಲಾಗುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಹೇಳಿದರು.
ಜಿಲ್ಲಾಡಳಿತ ವತಿಯಿಂದ ನಗರದ ಸರ್ಕಾರಿ ಪದವಿ ಪೂರ್ವ(ಮಾ.ಪು) ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.


ಕಲ್ಯಾಣ ಕರ್ನಾಟಕ ಪ್ರದೇಶವು ನಿಜಾಮರ ಅಳ್ವಿಕೆಯಿಂದ ಸ್ವಾತಂತ್ರ್ಯಗೊಂಡು 77 ವರ್ಷಗಳಾಗಿವೆ. ಭವ್ಯ ಪರಂಪರೆ ಹೊಂದಿರುವ ಭಾರತವು ಹತ್ತಾರು ಕಾರಣಗಳಿಂದಾಗಿ ಪರಕೀಯರ ಆಡಳಿತಕ್ಕೆ ಒಳಗಾಗಿತ್ತು. ರಾಷ್ಟçಕ್ಕೆ 1947ರ ಆಗಸ್ಟ್ 15 ರಂದು ಸ್ವಾತಂತ್ರ್ಯ ದೊರೆತರೂ ಹೈದ್ರಾಬಾದ್ ಸಂಸ್ಥಾನದ ಪ್ರಜೆಗಳಿಗೆ ಸ್ವಾತಂತ್ರ್ಯ ದೊರೆತಿರಲಿಲ್ಲ. ಹೈದ್ರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಸ್ವಾತಂತ್ರ್ಯ ಹೊಂದಲು ಒಂದು ವರ್ಷ ಕಾಲ (1948 ರ ಸೆ.17) ಕಾಯಬೇಕಾಯಿತು ಎಂದರು.
2013 ರ ನ.06 ರಂದು ಅಂದಿನ ನಮ್ಮ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಿ, ಈ ಭಾಗದ 40 ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೂ ಸೇರಿದಂತೆ ಎಲ್ಲಾ ಭಾಗಗಳ ಮೂಲಭೂತ ಸೌಕರ್ಯ, ಆರೋಗ್ಯ, ಸಾಮಾಜಿಕ, ರಸ್ತೆ ಸಂಪರ್ಕ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕೆ ವಿಶೇಷ ಅನುದಾನ ಮೀಸಲಿರಿಸುವ ಕಾರ್ಯ ಮಾಡಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ.1954.22 ಕೋಟಿ ಅನುದಾನ ಹಂಚಿಕೆಯಾಗಿದ್ದು, ಅದರಲ್ಲಿ 5524 ಕಾಮಗಾರಿಗಳನ್ನು ಕೈಗೆತ್ತಿಕೊಂಡು 4966 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕೆ ರೂ.1412.84 ಕೋಟಿ ಅನುದಾನ ವೆಚ್ಚ ಮಾಡಲಾಗಿದೆ. ಬಾಕಿ ಉಳಿದ 402 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಗೆ ಒಳಪಡುವ 07 ಜಿಲ್ಲೆಗಳಲ್ಲಿ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ ಶೇ.50 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಹಾಗೂ ಇತರೆ ಜಿಲ್ಲೆಗಳಲ್ಲಿ ಈ ಭಾಗದ ಜನರಿಗಾಗಿ ಶೇಕಡವಾರು ಶೇ.8 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. 371 (ಜೆ) ಪ್ರಮಾಣ ಪತ್ರಗಳಿಂದ ಶಿಕ್ಷಣದಲ್ಲಿ ಹಾಗೂ ವಿವಿಧ ಇಲಾಖೆಗಳಲ್ಲಿ ಉದ್ಯೋಗದ ಮೀಸಲಾತಿ ಪಡೆಯಲು ಅನುಕೂಲವಾಗುತ್ತಿದೆ ಎಂದು ಸಚಿವರು ಹೇಳಿದರು.


ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ‘ಎ’ ಮತ್ತು ‘ಬಿ’ ಖಾತಾ ಯೋಜನೆಯನ್ನು   ಎರಡೂ ಸದನಗಳಲ್ಲಿ ಮಂಡಿಸಿ ಕಾಯ್ದೆರೂಪಕ್ಕೆ ತಂದು ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಾನೂನಾತ್ಮಕವಾಗಿ ಜಾರಿಗೆ ತರಲಾಗಿದೆ. ಅನೇಕ ವರ್ಷಗಳಿಂದ ಅನಧಿಕೃತವಾಗಿದ್ದ ಕಟ್ಟಡ ಮತ್ತು ನಿವೇಶನಗಳಿಗೆ ‘ಇ’ ಖಾತಾ ನೀಡುವುದರ ಮೂಲಕ ತೆರಿಗೆ ವ್ಯಾಪ್ತಿಗೆ ತಂದು ಅನೇಕ ಬಡಜನರ ಕನಸನ್ನು ನನಸಾಗಿ ಮಾಡಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳ ಆಶಯದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಹಾಗೂ ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ, ಚರಂಡಿ, ಬೀದಿ ದೀಪ, ಕುಡಿಯುವ ನೀರು ಹಾಗೂ ಸ್ವಚ್ವತೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಸಂಸದ ಈ.ತುಕಾರಾಮ್ ಅವರು ಮಾತನಾಡಿ, ಆಗಿನ ಸಂದರ್ಭದಲ್ಲಿ ರಾಜ್ಯದ ಬೆಂಗಳೂರು ಪ್ರಾಂತ್ಯ, ಮುಂಬೈ ಪ್ರಾಂತ್ಯ ಮತ್ತು ಹೈದರಬಾದ್ ಪ್ರಾಂತ್ಯದಲ್ಲಿನ ತಾರತಮ್ಯ, ಪ್ರಾದೇಶಿಕ ಅಸಮತೋಲನಹೋಗಲಾಡಿಸಲು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು 2002ರಲ್ಲಿ ಡಾ.ನಂಜುಂಡಪ್ಪ ಅವರ ನೇತೃತ್ವದ ಡಾ.ನಂಜುಂಡಪ್ಪ ಸಮಿತಿ ರಚಿಸಿ ವರದಿ ತಯಾರಿಸಲು ಸೂಚಿಸಿದ್ದರು. ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ದಿಯಲ್ಲಿ ಹಿಂದುಳಿದ, ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ತಾಲ್ಲೂಕುಗಳನ್ನು ಗುರುತಿಸಿ ಸಂಪೂರ್ಣ ಅಭಿವೃದ್ಧಿ ಕರ್ನಾಟಕ ಮಾಡುವ ಪಣತೊಟ್ಟಿದ್ದರು ಎಂದು ಹೇಳಿದರು.


175 ತಾಲ್ಲೂಕುಗಳಲ್ಲಿ 114 ತಾಲ್ಲೂಕು ಹಿಂದುಳಿದ ವರದಿಯಾದರೆ, ಕಲ್ಯಾಣ ಕರ್ನಾಟಕ ಭಾಗದ 39 ತಾಲ್ಲೂಕುಗಳಲ್ಲಿ 21 ತಾಲ್ಲೂಕುಗಳು ಅತ್ಯಂತ ಹಿಂದುಳಿದ ತಾಲ್ಲೂಕುಗಳಿವೆ ಎಂದು ವರದಿ ನೀಡಿದ ಬೆನ್ನಲ್ಲೆ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ವಿಶೇಷ ಸ್ಥಾನಮಾನ ದೊರಕಿಸಲು ಪ್ರಯತ್ನ ಪಟ್ಟರು ಎಂದು ಮಾಹಿತಿ ನೀಡಿದರು.
ಅಖಂಡ ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳು ರೂಪುಗೊಂಡು ಕಾರ್ಯಪ್ರವೃತ್ತವಾಗಿದ್ದು, ಮುಂಬರುವ ದಿನಮಾನಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಉಜ್ವಲ ಭವಿಷ್ಯ ನಿರ್ಮಿಸೋಣ ಎಂದು ಕರೆ ನೀಡಿದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಸ್ವಾತಂತ್ರö್ಯ ರಾಷ್ಟç ಕಟ್ಟುವ ಬಯಕೆಯಿಂದ ಹೈದ್ರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಸೇರಿಕೊಳ್ಳದೇ ಸ್ವತಂತ್ರವಾಗಿರಲು ಬಯಸಿ ಹೈದ್ರಬಾದ್ ಸಂಸ್ಥಾನವನ್ನು ಸ್ವಾತಂತ್ರö್ಯ ರಾಷ್ಟçವೆಂದು ಘೋಷಿಸಿದ. ಇದರಿಂದಾಗಿ ಇಲ್ಲಿಯ ಜನರು ನಿರಂತರ ಶೋಷಣೆಗೆ ಒಳಪಟ್ಟಿದರು ಎಂದು ಹೇಳಿದರು.


ಹೈದ್ರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತಿಗೊಳ್ಳಲು ಅನೇಕರು ಒಗ್ಗೂಡಿ ಚಳುವಳಿಯನ್ನು ಪ್ರಾರಂಭಿಸಿದರು. ಚಳುವಳಿಯನ್ನು ಹತ್ತಿಕ್ಕಲು ಹೈದ್ರಾಬಾದ್ ನಿಜಾಮನು ಖಾಸಿಂ ರಜ್ವಿ ಎಂಬುವವನ ನೇತೃತ್ವದಲ್ಲಿ ರಜಾಕಾರ ದಾಳಿಯನ್ನು ಆರಂಭಿಸಿದನು. ಇದರ ಪರಿಣಾಮವಾಗಿ ಈ ಭಾಗದ ಜನರು ಅಭಿವ್ಯಕ್ತಿ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮೂಲಭೂತ ಹಕ್ಕುಗಳು ಜನರಪಾಲಿಗೆ ಇಲ್ಲವಾಗಿ, ಈ ಪ್ರದೇಶದ ಆರ್ಥಿಕ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳ ಪ್ರಗತಿ ಶೂನ್ಯದ ಕಡೆಗೆ ಹೆಜ್ಜೆ ಇಡುವಂತಾಯಿತು. ಆಗಿನ ಸಂದರ್ಭದಲ್ಲಿ ವಿವಿಧ ಸಂಘ- ಸಂಸ್ಥೆಗಳು ಹೋರಾಟಕ್ಕೆ ಇಳಿದು ರಜಾಕಾರರ ದಬ್ಬಾಳಿಕೆಯನ್ನು ಧಿಕ್ಕರಿಸಿ ಸ್ವಾತಂತ್ರö್ಯ ಪಡೆಯುವಲ್ಲಿ ಯಶಸ್ವಿಯಾದರು. ಇವರನ್ನೆಲ್ಲಾ ನಾವು ಇಂದು ಸ್ಮರಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ್ದ ಪ್ರಬಂಧ, ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಉಪಮೇಯರ್ ಡಿ.ಸುಕುಂ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ವರ್ತಿಕ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಡಿಎಂಎಫ್ ವಿಶೇಷ ಅಧಿಕಾರಿ ಲೋಕೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST