ಬಳ್ಳಾರಿ: ಗಣಿ ಕಾರ್ಮಿಕರನ್ನು ಖಾಯಂಗೊಳಿಸಬೇಕು, ಅಲ್ಲಿಯವರೆಗೂ ಸೇವಾಭದ್ರತೆ ನೀಡಬೇಕು, ಗುತ್ತಿಗೆದಾರರು ಬದಲಾದರೂ ಈಗ ಇರುವ ಗುತ್ತಿಗೆ ಕಾರ್ಮಿಕರನ್ನೇ ಕೆಲಸದಲ್ಲಿ ಮುಂದುವರೆಸಬೇಕು ಎನ್ನವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇದೇ ನ.೨೦ರಂದು ಸಂಡೂರಿನಲ್ಲಿ ಗಣಿ ಕಾರ್ಮಿಕರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಗಣಿ ಕಾರ್ಮಿಕರ ಸಂಘದ ಉಪಾಧ್ಯಕ್ಷ ಎ.ದೇವದಾಸ್ ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಐಯುಟಿಯುಸಿಗೆ ಸಂಯೋಜನೆಗೊಂಡ ಸಂಯುಕ್ತ ಗಣಿ ಕಾರ್ಮಿಕರ ಸಂಘದಿಂದ ಸಂಡೂರಿನ ಅಂಬೇಡ್ಕರ್ ಭವನದಲ್ಲಿ ಗಣಿ ಕಾರ್ಮಿಕರ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಸಂಡೂರು, ಬಳ್ಳಾರಿ ಹಾಗೂ ಹೊಸಪೇಟೆಯ ಗಣಿ ಕಾರ್ಮಿಕರು ಭಾಗವಹಿಸಲಿದ್ದಾರೆ. ಸಮ್ಮೇಳನದ ಸಭೆಯ ಮುನ್ನ ಸಂಡೂರಿನ ಎಪಿಎಂಸಿಯಿಂದ ಬೃಹತ್ ಮೆರವಣಿಗೆ ಪ್ರಾರಂಭವಾಗುತ್ತದೆ. ನಂತರ ಸಮ್ಮೇಳನದಲ್ಲಿ ಗಣಿ ಕಾರ್ಮಿಕರ ಸಮಸ್ಯೆ ಹಾಗೂ ಪರಿಹಾರಗಳ ಕುರಿತು ವಿಸ್ತೃತ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದರು.
ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸೂಕ್ತ ಕಾನೂನು ರೂಪಿಸಬೇಕು, ಕನಿಷ್ಠ ವೇತನ, ರಜೆ, ಬೋನಸ್, ಪಿಎಫ್ ಮುಂತಾದ ಕಾನೂನುಬದ್ಧ ಸೌಲಭ್ಯಗಳನ್ನು ಖಾತ್ರಿಪಡಿಸಬೇಕು, ಗಣಿಬಾಧಿತ ಈ ಪ್ರದೇಶದಲ್ಲಿ ಕೇಂದ್ರ ಸರ್ಕಾರದ ಸುಸಜ್ಜಿತ ವೆಲ್ಫೇರ್ ಆಸ್ಪತ್ರೆ ಮತ್ತೆ ಆರಂಭಿಸಬೇಕು, ಕೆ.ಎಂ.ಇ.ಆರ್.ಸಿ ಫಂಡ್ನ್ನು ಸಮರ್ಪಕವಾಗಿ ಬಳಸಿ, ಕೆಲಸ ಕಳೆದುಕೊಂಡ ಗಣಿ ಕಾರ್ಮಿಕರ ಜೀವನೋಪಾಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು, ಗಣಿಕಾರ್ಮಿಕರಿಗೆ ಉತ್ತಮ ಆರೋಗ್ಯ ವ್ಯವಸ್ಥೆ ನೀಡಬೇಕು ಹಾಗೂ ಅವರ ಮಕ್ಕಳ ಶಿಕ್ಷಣಕ್ಕೆ ಸೂಕ್ತ ಸೌಲಭ್ಯ ನೀಡಬೇಕು ಮುಂತಾದ ಬೇಡಿಕೆಗಳಿಗಾಗಿ ಒತ್ತಾಯಿಸಿ ಗಣಿ ಕಾರ್ಮಿಕರ ಸಮ್ಮೇಳನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಸಮ್ಮೇಳನಕ್ಕೆ ಮುಖ್ಯ ಭಾಷಣಕಾರರಾಗಿ ಸಂಯುಕ್ತ ಗಣಿ ಕಾರ್ಮಿಕ ಸಂಘದ ಅಧ್ಯಕ್ಷರು ಹಾಗೂ ಎಐಯುಟಿಯುಸಿ ರಾಜ್ಯ ಅಧ್ಯಕ್ಷರಾದ ಕೆ.ಸೋಮಶೇಖರ್ ಅವರು ಆಗಮಿಸಲಿದ್ದಾರೆ. ಭಾಷಣಕಾರರಾಗಿ ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಯಾದಗಿರಿ, ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್.ಎನ್ ಆಗಮಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಸಂಯುಕ್ತ ಗಣಿ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಸೋಮಶೇಖರ ಗೌಡ ಮಾತನಾಡಲಿದ್ದಾರೆ. ಈ ಸಮ್ಮೇಳನದ ಅಧ್ಯಕ್ಷತೆಯನ್ನು ಸಂಯುಕ್ತ ಗಣಿ ಕಾರ್ಮಿಕ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಎ.ದೇವದಾಸ್ ವಹಿಸಲಿದ್ದಾರೆ. ಈ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗಣಿ ಕಾರ್ಮಿಕರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಸಂಯುಕ್ತ ಗಣಿ ಕಾರ್ಮಿಕರ ಸಂಘವು ಮನವಿ ಮಾಡುತ್ತದೆ ಎಂದು ಅವರು ತಿಳಿಸಿದರು.
ಸಂಯುಕ್ತ ಗಣಿ ಕಾರ್ಮಿಕ ಸಂಘದ ಕಾರ್ಯದರ್ಶಿ ಆರ್.ಸೋಮಶೇಖರ ಗೌಡ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್, ಉಪಾಧ್ಯಕ್ಷರಾದ ಎ.ಶಾಂತಾ, ಜಂಟಿ ಕಾರ್ಯದರ್ಶಿ ಸುರೇಶ್, ಮುಖಂಡರಾದ ಶರ್ಮಾಸ್, ಕಿರಣ್ ಕುಮಾರ್, ಮುರಳಿಕೃಷ್ಣ, ಕೊಟ್ರೇಶ್, ಸುರೇಶ್, ಹೇಮಣ್ಣ ಮತ್ತಿತರರು ಪತ್ರಿಕಾ ಗೋಷ್ಠಿಯಲ್ಲಿದ್ದರು.