ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಅರಣ್ಯ, ಜೀವಿಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಪೌರಾಡಳಿತ ಸಚಿವರಾದ ರಹೀಂ ಖಾನ್, ಮಾಜಿ ಸಚಿವರಾದ ರಾಜಶೇಖರ ವಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಶಾಸಕರು ಸರ್ಕಾರಕ್ಕೆ ಈ ಕುರಿತು ಶಿಫಾರಸು ಮಾಡಿದ್ದಾರೆ.
ನಮ್ಮಂತಹ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಹಲವು ವರ್ಷಗಳಿಂದ ಪಕ್ಷಕ್ಕಾಗಿ ಅಹರ್ನಿಶಿ ದುಡಿಯುತ್ತಿದ್ದಾರೆ. ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ಕೆಲವೊಂದು ನಾಮ ನಿರ್ದೇಶನ ಸ್ಥಾನಗಳಿಗೆ ಭರ್ತಿ ಮಾಡುವಂತೆ ಕೋರಿ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದಾರೆ. ಪಕ್ಷಕ್ಕಾಗಿ ದುಡಿದವರು ಕೆಪಿಸಿಸಿ ನಾಯಕರ ಬಳಿ ಈ ಕುರಿತು ಅಲವತ್ತುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಬಳಿಯೂ ಕೋರಿಕೊಂಡಿದ್ದಾರೆ. ಇಂದಲ್ಲ, ನಾಳೆ ತಮಗೆ ಅವಕಾಶ ಸಿಗಬಹುದು ಎಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸರ್ಕಾರ ರಚನೆ ಆಗಿ ಎರಡು ವರ್ಷ ಕಳೆದರೂ ಇನ್ನೂ ಖಾಲಿ ಇರುವ ಸ್ಥಾನಗಳಿಗೆ ಭರ್ತಿ ಮಾಡಿರುವುದಿಲ್ಲ. ಈ ಕಾರಣಕ್ಕಾಗಿ ಕಾರ್ಯಕರ್ತರು ಬೇಸರಿಸಿಕೊಂಡಿದ್ದಾರೆ ಎಂದರು.

ಖಾಲಿ ಉಳಿದಿರುವ ಸ್ಥಾನಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿದರೆ ಪಕ್ಷಕ್ಕಾಗಿ ದುಡಿಯಲು ಇನ್ನಷ್ಟು ಹುಮ್ಮಸ್ಸು ಬರುತ್ತದೆ. ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಸಂಘಟಿಸಲು ಆನೆ ಬಲ ಬಂದಂತಾಗುತ್ತದೆ. ಪಕ್ಷದ ನಾಯಕರು ಮತ್ತು ಸರ್ಕಾರ ನಡೆಸುವ ಆಡಳಿತಗಾರರು ಕಾರ್ಯಕರ್ತರಿಗೆ ನಿರಾಶೆಗೊಳಿಸದೇ ಅವಕಾಶ ಮಾಡಿಕೊಡಬೇಕು. ಅಲೆಮಾರಿ ನಿಗಮದ ಅಧ್ಯಕ್ಷ ಸ್ಥಾನ ಮತ್ತು ಆಯೋಗದ ಸ್ಥಾನವೂ ಖಾಲಿ ಇವೆ. ಹಲವಾರು ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ನಿರ್ದೇಶಕರ ಸ್ಥಾನಗಳು ಖಾಲಿ ಇದ್ದು ಸರ್ಕಾರದಿಂದ ನಾಮ ನಿರ್ದೇಶನ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.