LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು

ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ರೆಡ್ಡಿ ಶ್ರೀನಿವಾಸ ಸೂಚನೆ



 

ಕೊಪ್ಪಳ : ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.

          ಅವರು ಮಂಗಳವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

          ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅರ್ಹರೆಲ್ಲರೂ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯಬಾರದು. ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಿ, ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದರು.



          ಅನ್ನಭಾಗ್ಯ ಯೋಜನೆಯಡಿ ಅರ್ಹ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಹೆಚ್ಚುವರಿ ಐದು ಕೆ.ಜಿ ಒಳಗೊಂಡಂತೆ ಒಟ್ಟು ಹತ್ತು ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಜನರು ಈ ಅಕ್ಕಿಯನ್ನು ಮಾರಾಟ ಮಾಡಿಕೊಳ್ಳುತ್ತಿರುವ ಬಗ್ಗೆ ಹಲವಾರು ಪ್ರಕರಣಗಳು ಕಂಡು ಬರುತ್ತಿದ್ದು, ಇದಕ್ಕಾಗಿ ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲಿಗೆ ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಅಥವಾ ಇತರೆ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಿದರೆ ಜನರಿಗೆ ತುಂಬಾ ಅನುಕೂಲವಾಗಲಿದೆ. ಇದರ ಜೊತೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯ ಅನಧಿಕೃತ ಮಾರಾಟವನ್ನು ಸಹ ತಡೆಯಬಹುದು. ಈ ಕುರಿತು ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ ಅಕ್ಕಿ ಜೊತೆಗೆ ಇತರೆ ಆಹಾರ ಸಾಮಗ್ರಿ ವಿತರಣೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

          ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಐದು ಕೆ.ಜಿ ಅಕ್ಕಿಯ ಬದಲಿಗೆ ಇತರೆ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲು ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿಯೂ ಈ ವಿಷಯ ಪ್ರಸ್ತಾಪಿಸಿ, ಸಾರ್ವಜನಿಕರಿಂದ ಅನಿಸಿಕೆ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದರು.



ಐದು ಗ್ಯಾರಂಟಿ ಯೋಜನೆಗಳ ಪ್ರಗತಿ:

          ಗೃಹಲಕ್ಷ್ಮಿ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,26,014 ಫಲಾನುಭವಿಗಳಿಗೆ ಏಪ್ರಿಲ್-2025ರ ಅಂತ್ಯದವರೆಗೆ ಡಿಬಿಟಿ ಮೂಲಕ 1098,44,56,600/- ರೂ.ಗಳನ್ನು ಪಾವತಿಸಲಾಗಿದೆ.

          ಗೃಹಜ್ಯೋತಿ ಯೋಜನೆಯಡಿ ಏಪ್ರಿಲ್-2025ರ ಅಂತ್ಯದವರೆಗೆ 2,75,936 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ 243.37 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.

          ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ  2,99,213 ಕಾರ್ಡುದಾರರಿಗೆ. 2025ರ ಫೆಬ್ರವರಿ ಮಾಹೆಯಿಂದ ಇಲ್ಲಿಯವರೆಗೂ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ.

          ಶಕ್ತಿ ಯೋಜನೆಯಡಿ  2025ರ ಮೇ ಮಾಹೆಯಲ್ಲಿ 34,77,996 ಮಹಿಳೆಯರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 15,04,44,105 ರೂ.ಗಳ ಖರ್ಚಾಗಿದೆ.

          ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ (ಮೇ-2025) 8,881 ಫಲಾನುಭವಿಗಳು ನೋಂದಣಿಯಾಗಿದ್ದು, ಒಟ್ಟು ಮೊತ್ತ ರೂ. 11.58 ಕೋಟಿಗಳನ್ನು ಪಾವತಿಸಲಾಗಿರುತ್ತದೆ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

          ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ. ಮತ್ತು ಖಾಸಿಂಸಾಬ ಮರ್ದಾನಸಾಬ, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST