ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 124ನೇ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಲಾಶಯದಲ್ಲಿನ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ.
ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ಜುಲೈ 2 ರಿಂದ ಜುಲೈ 15 ರವರೆಗೆ 2000 ಕ್ಯೂಸೆಕ್ಸ್ ನಂತೆ, ಜುಲೈ 16 ರಿಂದ 31ರವರೆಗೆ 3000 ಕ್ಯೂ ಸೆಕ್ಸ್ ನಂತೆ ಮತ್ತು ಆಗಸ್ಟ್ 1ರಿಂದ ನವೆಂಬರ್ 30ರವರೆಗೆ 4100 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು ಎಂದು ಹೇಳಿದರು.

ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜುಲೈ 10ರಿಂದ ಜುಲೈ 31ರವರೆಗೆ ಸರಾಸರಿ 700 ಕ್ಯೂ ಸೆಕ್ಸ್ ನಂತೆ ಆಗಸ್ಟ್ 1ರಿಂದ ನವೆಂಬರ್ 30ರವರೆಗೆ 1300 ಕ್ಯೂಸೆಕ್ಸ್, ಬಲದಂಡೆಯ ಕೆಳಮಟ್ಟದ ಕಾಲುವೆಗೆ 500 ಕ್ಯೂಸೆಕ್ಸ್ , ಆಗಸ್ಟ್ 1 ರಿಂದ ನವೆಂಬರ್ 31ರವರೆಗೆ 650 ಕ್ಯೂ ಸೆಕ್ಸ್ ನೀರನ್ನು ಹರಿಸಲಾಗುವುದು.
ರಾಯ ಬಸವಣ್ಣ ಕಾಲುವೆಗೆ 220 ಕ್ಯೂಸೆಕ್ಸ್ ಹಾಗೂ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ ಅಥವಾ ಕಾಲುವೆಯಡಿ ನೀರಿನ ಲಭ್ಯತೆ ಆಧಾರದ ಮೇರೆಗೆ ನೀರು ಹರಿಸಲು ಸಲಹಾ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆದಿದ್ದು, ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕು ರೈತರು ಬೇಡಿಕೆ ಇಟ್ಟಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜುಲೈ 2ನೇ ವಾರ ಅಥವಾ ಮೂರನೇ ವಾರದಲ್ಲಿ ಸಭೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು ಎಂದರು.

ಬೋರ್ಡಿನ ಕೆಲ ಅಧಿಕಾರಿಗಳು ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ನೀಡಲಾಗುವುದು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ರೈತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಸಿದ ಸಚಿವರು ಇದೀಗ ಒಂದು ಬೆಳೆಗೆ ನೀರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಸಭೆಯಲ್ಲಿ ಎರಡನೇ ಬೆಳೆಗೆ ನೀರು ನೀಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ರೈತರ ಹಿತಕರ ಪಾಡುವುದು ನಮ್ಮ ಉದ್ದೇಶ. ಇದರಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.
ಜಲಾಶಯದ 32 ಗೇಟ್ ಅನ್ನು ಬದಲಾವಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವರು ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈ ಸಭೆಯಲ್ಲಿ ಅಣೆಕಟ್ಟೆಯ ಪರಿಣಿತ ತಜ್ಞರು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ವಿವರಿಸಿದರು.
ಸಭೆಯಲ್ಲಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಬಿ.ನಾಗೇಂದ್ರ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ್,
ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ಬಸವನಗೌಡ ತುರುವಿಹಾಳ್, ಶಿವರಾಜ್ ಪಾಟೀಲ್, ಬಿ.ಎಂ. ನಾಗರಾಜ್, ರೈತ ಮುಖಂಡರು ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.